![MANGALORE: ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ: ಕೈಗಾರಿಕಾ ಸಚಿವ ನಿರಾಣಿ MANGALORE: ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ: ಕೈಗಾರಿಕಾ ಸಚಿವ ನಿರಾಣಿ](https://blogger.googleusercontent.com/img/b/R29vZ2xl/AVvXsEh9LaOJYGmcdUTnv8CgUGuabo0lAvFwXzbdCRQBHtafUVGAXH_sE2GFKc-VWm_3xJdL99xmZppPIaK1wtib1Vk4vhe7xzXiia_PJu_KTLC27qnNNGsqdWnjCZNMaBDsg1NWN7bykGtp047KrrvenOGLugObJTdtXbmsF4Ba0ToiPZofjtbjfTNonBhB/w640-h360/WhatsApp%20Image%202022-05-12%20at%201.00.36%20PM.jpeg)
MANGALORE: ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ: ಕೈಗಾರಿಕಾ ಸಚಿವ ನಿರಾಣಿ
ಮಂಗಳೂರು: ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ. ದೃಢ ಸಂಕಲ್ಪ ಇದ್ದರೆ ಸಾಕು, ಉದ್ಯಮ ಆರಂಭಿಸಬಹುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಅವರು ತಿಳಿಸಿದರು.
ಅವರು ಮೇ.12ರ ಗುರುವಾರ ನಗರದ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ದಿಮೆಶೀಲರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಕೆಐಎಡಿಬಿ)ಯಿಂದ ಕೈಗಾರಿಕೆ ನಿವೇಶನಕ್ಕೆ ಶೇಕಡಾ 75 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅದೇ ರೀತಿ ಆರ್ಥಿಕವಾಗಿ ಹಿಂದುಳಿದವರಿಗೂ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಅವರು ಹೇಳಿದರು.
ಮಂಗಳೂರು ಅಲ್ಲದೇ ಉಡುಪಿ ಹಾಗೂ ಪುತ್ತೂರಿನ ವಿದ್ಯಾರ್ಥಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 6000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಬಹಳ ಸಂತಸದ ವಿಚಾರ. ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿರುವವರ ಪೈಕಿ ಉದ್ಯಮ ಸ್ಥಾಪಿಸುವ ಆಸಕ್ತಿ ತೋರುವವರಿಗೆ ಅವರ ಆಯ್ಕೆಯ ಕ್ಷೇತ್ರದಲ್ಲಿ ಒಂದು ತಿಂಗಳವರೆಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಬ್ಯಾಂಕ್ ಲೋನ್, ಪ್ರಾಜೆಕ್ಟ್ ರಿಪೆÇೀರ್ಟ್ ಸಲ್ಲಿಸುವವರೆಗೆ ಆರಂಭದಿಂದ ಕೊನೆಯವರೆಗೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.